ಬೆಂಗಳೂರು : ರೈತ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ತಮ್ಮನ್ನು ಭೇಟಿಯಾದ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ರೈತರ ಪಂಪ್ ಸೆಟ್ ಗಳಿಗೆ ನಿರಂತರ 7 ತಾಸು ಮೂರು ಫೇಸ್ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ಪೂರೈಕೆ ಮಾಡಿಕೊಳ್ಳುವ ಕುರಿತು ಚಿಂತನೆ ಮಾಡಲಾಗುವುದು. ರಾಜ್ಯದ ವಿವಿಧೆಡೆ ಕೆಐಎಡಿಬಿ ಭೂಸ್ವಾಧೀನಪಡಿಸಿಕೊಂಡವರಿಗೆ ಅಲ್ಲಿ ಸ್ಥಾಪನೆಯಾಗುವ ಉದ್ಯಮ ಕೊಡಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ರಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.